18
ಬಿಲ್ದದನ ವಾದ
ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು:
“ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ?
ವಿವೇಕಿಯಾಗು, ಆಮೇಲೆ ಮಾತನಾಡೋಣ.
ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ?
ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?
ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ?
ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ?
ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ?
 
“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು;
ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.
ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು;
ಅವನ ಮೇಲಣ ತೂಗು ದೀಪವು ಆರಿಹೋಗುವುದು.
ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು;
ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು.
ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು;
ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು.
ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು;
ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.
10 ನೆಲದ ಮೇಲೆ ಪಾಶವೂ,
ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು.
11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ,
ಅವನ ಕಾಲುಗಳನ್ನು ಓಡುವಂತೆ ಮಾಡುವುವು.
12 ಅವನ ಬಲವು ಕುಸಿಯುವುದು;
ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು.
13 ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು;
ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು.
14 ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು.
ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು.
15 ಬೆಂಕಿಯು ಅವನ ಮನೆಯನ್ನು ಸುಡುವುದು;
ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.
16 ಬುಡದಿಂದ ಅವನ ಬೇರುಗಳು ಒಣಗುವುವು;
ಮೇಲಿನಿಂದ ಅವನ ರೆಂಬೆಯು ಬಾಡುವುದು.
17 ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು;
ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.
18 ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು;
ಅವನು ಲೋಕದಿಂದ ಬಹಿಷ್ಕರಿಸಲಾಗುವನು.
19 ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ,
ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
20 ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು;
ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.
21 ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು;
ದೇವರನ್ನು ಅರಿಯದವನ ಸ್ಥಿತಿ ಇದೇ.”